ಯು.ಟಿ. ಖಾದರ್ ಸಚಿವರಾಗಿದ್ದಾಗ ಕ್ಲಪ್ತ ಸಮಯದಲ್ಲಿ ಮರಳು ಸಿಗುತಿತ್ತು: ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್
ಯು.ಟಿ. ಖಾದರ್ ಸಚಿವರಾಗಿದ್ದಾಗ ಸ್ಯಾಂಡ್ ಬಜಾರ್ ಆಪ್ ಮಾಡಿ ಕಡಿಮೆ ಬೆಲೆಗೆ ಕ್ಲಪ್ತ ಸಮಯದಲ್ಲಿ ಮರಳು ಸಿಗುವಂತೆ ಮಾಡಿದ್ದರು. ಅದನ್ನು ನಿಲ್ಲಿಸಿದವರು ಯಾರು? ಡ್ರೆಜ್ಜಿಂಗ್ ಮೂಲಕ ಸೇತುವೆ ಅಡಿ ನಿರ್ಬಂಧಿತ ಪ್ರದೇಶದಲ್ಲಿ ಮರಳುಗಾರಿಕೆ ನಡೆದಿದ್ದು ತಮ್ಮ ನಾಲ್ಕು ವರ್ಷಗಳ ಆಡಳಿತ ಅವಧಿಯಲ್ಲೇ ಎಂಬುದನ್ನು ಶಾಸಕ ವೇದವ್ಯಾಸ ಕಾಮತ್ ನೆನಪಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸವಾಲ್ ಹಾಕಿದ್ದಾರೆ.
ಅವರು ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರು ಕಾಂಗ್ರೆಸ್ ಸರಕಾರದ ವಿರುದ್ಧ ಮಾಡಿರುವ ಆರೋಪಗಳ ಬಗ್ಗೆ ಮಲ್ಲಿಕಟ್ಟೆಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಈ ರೀತಿ ಪ್ರತಿಕ್ರಿಯಿಸಿದರು.
ದ.ಕ. ಜಿಲ್ಲೆಯಲ್ಲಿ ಮರಳಿನ ಸಮಸ್ಯೆಗೆ ನಾಲ್ಕು ವರ್ಷ ಆಡಳಿತ ನಡೆಸಿದ ಬಿಜೆಪಿಯ ಮರಳು ನೀತಿಯೇ ಕಾರಣ ಹೊರತು ಕಾಂಗ್ರೆಸ್ ಸರಕಾರವಲ್ಲ. ಫೋನ್ ಮಾಡಿದರೆ ಸಾಕು, 2 ಸಾವಿರಕ್ಕೆ ಒಂದು ಲೋಡ್ ಮರಳು ಮನೆ ಬಾಗಿಲಿಗೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮಾಡಿದ್ದ ಘೋಷಣೆ ಅನುಷ್ಠಾನ ಆಗಿದೆಯೇ ಎಂದು ಪ್ರಶ್ನಿಸಿದ್ದಾರೆ.