ಕಾಫಿ ಕೊಯ್ಲು ಮಾಡುತ್ತಿದ್ದಾಗ ಕಾಡುಕೋಣ ದಾಳಿ: ಕಾರ್ಮಿಕ ಮಹಿಳೆ ಸಾವು
ಕೊಟ್ಟಿಗೆಹಾರ: ಕಾಡುಕೋಣ ದಾಳಿ ನಡೆಸಿದ ಪರಿಣಾಮ ಕಾರ್ಮಿಕ ಮಹಿಳೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಹಳೆಕೋಟೆ ಗ್ರಾಮದಲ್ಲಿ ನಡೆದಿದೆ.
ಬುಧವಾರ ಬೆಳೆಗ್ಗೆ ಹಳೇಕೋಟೆ ಗ್ರಾಮದ ಕಾಫಿ ಬೆಳೆಗಾರರಾದ ಹಳೇಕೋಟೆ ರಮೇಶ್ ಅವರ ಶಾರದಾಂಭ ಎಸ್ಟೇಟ್ ನಲ್ಲಿ ಈ ದುರ್ಘಟನೆ ನಡೆದಿದೆ.
ಇಂದು ಬೆಳಿಗ್ಗೆ ಅಸ್ಸಾಂ ಮೂಲದ ಕಾರ್ಮಿಕರು ರಮೇಶ್ ಅವರ ತೋಟದಲ್ಲಿ ಕಾಫಿ ಕೊಯ್ಲು ಮಾಡುವುದರಲ್ಲಿ ನಿರತರಾಗಿದ್ದರು. ಸುಮಾರು 11 ಗಂಟೆ ಸಮಯದಲ್ಲಿ ಏಕಾಏಕಿ ಕಾಡುಕೋಣವೊಂದು ಕಾರ್ಮಿಕರ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ ಅಸ್ಸಾಂ ಮೂಲದ ವಿವಾಹಿತ ಮಹಿಳಾ ಕಾರ್ಮಿಕರೊಬ್ಬರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಬಸೂರಿ ಬೀಬಿ (42 ವರ್ಷ) ಸಾವನ್ನಪ್ಪಿರುವ ದುರ್ದೈವಿ.
ಕಾಡುಕೋಣ ಮಹಿಳೆಯ ಹೊಟ್ಟೆ ಮತ್ತು ಎದೆಯ ಭಾಗದಕ್ಕೆ ತಮ್ಮ ಕೊಂಬಿನಿಂದ ತಿವಿದಿದ್ದು, ತೀವ್ರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮೃತದೇಹವನ್ನು ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ಕೊಂಡೊಯ್ದಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.
ಮಹಿಳೆಯ ಸಾವಿನಿಂದ ಅವರ ಜೊತೆಯಲ್ಲಿದ್ದ ಕುಟುಂಬದವರು ಮತ್ತು ಸಂಬಂಧಿಕರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ.
ಮಲೆನಾಡು ಭಾಗದಲ್ಲಿ ಕಾಡುಕೋಣಗಳು ವಿಪರೀತ ಸಂಖ್ಯೆಯಲ್ಲಿದ್ದು, ನಿರಂತರವಾಗಿ ಕಾಫಿ ತೋಟಗಳಿಗೆ ಲಗ್ಗೆ ಇಡುತ್ತಿವೆ. ಕಾಫಿ ತೋಟಗಳಲ್ಲಿ ಗಿಡಗಳನ್ನು ಕಿತ್ತು ಹಾಕುವುದಲ್ಲದೇ, ಈ ರೀತಿಯ ಜೀವ ಹಾನಿಗೂ ಕಾರಣವಾಗುತ್ತಿವೆ. ಕಾಡುಕೋಣಗಳ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಸೂಕ್ತ ಕ್ರಮ ವಹಿಸಬೇಕು ಎಂದು ಸ್ಥಳೀಯರು ಆಗ್ರಹಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: