ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ದುರಂತ ಸ್ಥಳಕ್ಕೆ ಭೇಟಿ ನೀಡಿ ‘ಇದೊಂದು ಭೀಕರ ದುರಂತ’ ಎಂದ ಬಂಗಾಳ ರಾಜ್ಯಪಾಲರು
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಅವರು ರಾಜ್ಯದ ಉತ್ತರ 24 ಪರಗಣ ಜಿಲ್ಲೆಯ ದತ್ತಪುಕುರ್ ಪ್ರದೇಶದಲ್ಲಿ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭೇಟಿಯ ನಂತರ ರಾಜ್ಯಪಾಲ ಸಿ.ವಿ.ಆನಂದ ಬೋಸ್ ಅವರು ಇಂಡಿಯಾ ಟುಡೇ ಜೊತೆ ಮಾತನಾಡಿ, ಈ ಘಟನೆಯನ್ನು ಭೀಕರ ಘಟನೆ ಎಂದು ಬಣ್ಣಿಸಿದ್ದಾರೆ. “ಇದೊಂದು ಭೀಕರ ದುರಂತ. ಇಲ್ಲಿ ಮಾನವ ದೋಷವಿರಬಹುದು. ಆದರೆ ಈ ಬಗ್ಗೆ ತನಿಖೆ ನಡೆಸಲಾಗುವುದು. ನಾನು ಸ್ಥಳದಲ್ಲಿದ್ದು ರೋಗಿಗಳನ್ನು ಭೇಟಿಯಾದೆ” ಎಂದು ಬೋಸ್ ಇಂಡಿಯಾ ಟುಡೇಗೆ ತಿಳಿಸಿದ್ದಾರೆ.
ಇದೇ ವೇಳೆ ಅವರು ಬರಾಸತ್ ಆಸ್ಪತ್ರೆಗೆ ಭೇಟಿ ನೀಡಿದರು. ಅಲ್ಲಿ ಅವರು ಆಸ್ಪತ್ರೆಯಲ್ಲಿ ದಾಖಲಾದ ಹಲವಾರು ಮಂದಿ ಗಾಯಾಳುಗಳನ್ನು ಭೇಟಿ ಮಾಡಿದರು. ವೈದ್ಯರಿಂದ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿದರು.
ಮೃತರ ಮತ್ತು ಗಾಯಗೊಂಡವರ ಕುಟುಂಬಗಳಿಗೆ ಯಾವುದೇ ಪರಿಹಾರ ಅಥವಾ ಹಣಕಾಸಿನ ನೆರವು ಇದೆಯೇ ಎಂದು ಕೇಳಿದಾಗ, ಸಾಧ್ಯವಿರುವ ಎಲ್ಲ ಸಹಾಯವನ್ನು ಸರಿಯಾದ ಸಮಯದಲ್ಲಿ ತಮ್ಮ ಕಚೇರಿಯಿಂದ ಘೋಷಿಸಲಾಗುವುದು ಎಂದು ಅವರು ಹೇಳಿದರು.
ಈ ದುರಂತದ ಬಗ್ಗೆ ತನಿಖೆ ನಡೆಸಲು ರಾಜ್ಯ ಸಂಸ್ಥೆಗಳಿಗೆ ಸಾಧ್ಯವಾಗುತ್ತದೆಯೇ ಅಥವಾ ಕೇಂದ್ರ ಸಂಸ್ಥೆ ಅಧಿಕಾರ ವಹಿಸಿಕೊಳ್ಳಬೇಕೆಂದು ಅವರು ಬಯಸುತ್ತಾರೆಯೇ ಎಂದು ಕೇಳಿದಾಗ, ರಾಜ್ಯಪಾಲ ಸಿ.ವಿ.ಆನಂದ ಬೋಸ್, “ಇದೀಗ ಅಪಘಾತದ ಬಗ್ಗೆ ತನಿಖೆ ನಡೆಯುತ್ತಿದೆ ಅಂದರು.