ಚೈತ್ರಾ ಕುಂದಾಪುರಗೆ ನಮ್ಮ ಮನೆಯಲ್ಲಿ ಆಶ್ರಯ ನೀಡಿಲ್ಲ: ಯುವ ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಮ್ ಸ್ಪಷ್ಟನೆ

ವಂಚನೆ ಪ್ರಕರಣದಲ್ಲಿ ಬಂಧಿತಳಾಗಿರುವ ಚೈತ್ರಾ ಕುಂದಾಪುರಗೆ ನಾನು ನಮ್ಮ ಮನೆಯಲ್ಲಿ ಯಾವುದೇ ಆಶ್ರಯ ನೀಡಿಲ್ಲ. ಇದೆಲ್ಲವೂ ಸುಳ್ಳು ಸುದ್ದಿ ಎಂದು ಯುವ ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಮ್ ಸ್ಪಷ್ಟಪಡಿಸಿದ್ದಾರೆ
ಆಕೆಗೆ ನಾನು ಕಳೆದ ಏಳು ದಿನಗಳಿಂದ ಆಶ್ರಯ ನೀಡಿದ್ದೇನೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಆದರೆ ಈ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಎಫ್ಐಆರ್ ದಾಖಲಾಗಿರುವುದು ಸೆ. 8ರಂದು. ಹಾಗಾದರೆ ಏಳು ದಿನ ಹೇಗೆ ಆಗುತ್ತೆ. ಇದರ ವಿರುದ್ಧ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ.ವನಾನು ಯಾವುದೇ ತಪ್ಪು ಮಾಡಿಲ್ಲ ನನಗೆ ನ್ಯಾಯ ಸಿಗಬೇಕು ಎಂದು ಅವರು ತಿಳಿಸಿದ್ದಾರೆ
ಹಲವು ವರ್ಷಗಳ ಹಿಂದೆ ನಾನು ಮತ್ತು ಆಕೆ ಒಂದೇ ಸ್ಥಳೀಯ ಸುದ್ದಿ ವಾಹಿನಿಯಲ್ಲಿ ಕೆಲಸ ಮಾಡಿದ್ದೇವೆ. ಅದು ಬಿಟ್ಟ ಬಳಿಕ ಆಕೆಯೊಂದಿಗೆ ಯಾವುದೇ ಸಂಬಂಧ ಇರಲಿಲ್ಲ. ಸಿಸಿಬಿ ಪೊಲೀಸರಿಂದ ನನಗೆ ಈವರೆಗೆ ಯಾವುದೇ ನೋಟಿಸ್ ಬಂದಿಲ್ಲ. ಸುದ್ದಿವಾಹಿಗಳಲ್ಲಿ ಬರುತ್ತಿರುವ ಸುಳ್ಳು ಸುದ್ದಿಗಳಿಂದ ನನಗೆ ಮಾನಸಿಕ ಹಿಂಸೆಯಾಗುತ್ತಿದೆ ಎಂದು ಅವರು ಅಳಲು ತೋಡಿಕೊಂಡರು.
ನನ್ನ ಮನೆಯಲ್ಲಿ ಆಕೆಯನ್ನು ಬಂಧಿಸಿದ್ದಾರೆಂದು ಕೆಲವು ಮಾಧ್ಯಮಗಳು ವರದಿ ಮಾಡುತ್ತಿದೆ. ಆದರೆ ಆಕೆಯನ್ನು ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್ ಪ್ರದೇಶದಲ್ಲಿ ವಶಕ್ಕೆ ಪಡೆದಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಕಂಡು ಬರುತ್ತಿದೆ ಎಂದು ಅವರು ತಿಳಿಸಿದ್ದಾರೆ.