ಪೌರತ್ವ ಕಾಯ್ದೆ ವಿವಾದ: ರದ್ದತಿಗೆ ಆಗ್ರಹಿಸಿ ಸುಪ್ರೀಂ ಕೋರ್ಟ್ ನಲ್ಲಿ ಹಲವಾರು ಅರ್ಜಿ ಸಲ್ಲಿಕೆ
ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕರಿಸಲ್ಪಟ್ಟ ಐದು ವರ್ಷಗಳ ಆನಂತರ ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಿದೆ. ಈ ಹಿನ್ನೆಲೆಯಲ್ಲಿ ಮಾ.11ರಂದು ಕೇಂದ್ರ ಸರ್ಕಾರವು ಹೊರಡಿಸಿರುವ ಅಧಿಸೂಚನೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ, ಸುಪ್ರೀಂ ಕೋರ್ಟ್ ನಲ್ಲಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿವೆ. ಸಿಎಎ ಜಾರಿಗೆ ತಡೆ ನೀಡಬೇಕು ಎಂದು ಮಧ್ಯಂತರ ಅರ್ಜಿಯಲ್ಲಿ ಕೋರಿವೆ.
ಅಸ್ಸಾಂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ದೇಬಬ್ರತ ಸೈಕಾ ಮತ್ತು ಅಸ್ಸಾಂನ ಕಾಂಗ್ರೆಸ್ ಸಂಸದ ಅಬ್ದುಲ್ ಖಲೀಕ್ ಸಿಎಎ ಅನುಷ್ಠಾನಕ್ಕೆ ತಡೆ ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದಾರೆ. ಈ ನಿಯಮಗಳು ಅಸಾಂವಿಧಾನಿಕ ಮತ್ತು ಅಸ್ಸಾಂ ಒಪ್ಪಂದವನ್ನು ಉಲ್ಲಂಘಿಸುತ್ತವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ, ಸಿಎಎಯ ಮೂಲಕ ಎನ್ಆರ್ಸಿಯಿಂದ ಮುಸ್ಲಿಮರನ್ನು ಮಾತ್ರ ಹೊರಗಿಡಲಾಗುತ್ತದೆ ಎಂದು ತಿಳಿಸಿದ್ದಾರೆ. ಅಸ್ಸಾಂನಲ್ಲಿ ಸಿಎಎ ವಿರುದ್ಧ ಮತ್ತೊಮ್ಮೆ ಪ್ರತಿಭಟನೆಗಳು ಪ್ರಾರಂಭವಾಗಿರುವ ಬೆನ್ನಲ್ಲೇ ಈ ಮಧ್ಯಂತರ ಅರ್ಜಿ ಸಲ್ಲಿಸಲಾಗಿದೆ.
೨೦೧೯ರಲ್ಲಿ ಕಾಯ್ದೆಗೆ ಸಂಸತ್ ಒಪ್ಪಿಗೆ ನೀಡಿದ ಸಮಯದಲ್ಲೂ ಸಹ ಐಯುಎಂಎಲ್ ಸಂಘಟನೆ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿಯ ಬಗ್ಗೆ ತೀರ್ಪು ಇನ್ನಷ್ಟೇ ಬರಬೇಕಿದೆ.
ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮತ್ತು ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ ಸಂಘಟನೆಗಳು ಕೂಡ ಅರ್ಜಿ ಸಲ್ಲಿಕೆ ಮಾಡಿವೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth