ಎಪಿಕ್ ಕಾರ್ಡ್‍ಗೆ ಆಧಾರ್ ಲಿಂಕ್ ಪ್ರಕ್ರಿಯೆಗೆ ಚುರುಕು ನೀಡಲು ಜಿಲ್ಲಾಧಿಕಾರಿ ಸೂಚನೆ

epic card
17/08/2022

ಮಂಗಳೂರು: ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ಗುರುತಿನ ಚೀಟಿ (ಎಪಿಕ್)ಗೆ ಆಧಾರ್ ಲಿಂಕ್ ಮಾಡುವ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಇಲಾಖೆಗಳು ಕೂಡಲೇ ಕಾರ್ಯ ಪ್ರವೃತ್ತರಾಗುವಂತೆ  ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ನಿರ್ದೇಶನ ನೀಡಿದರು.

ಬುಧವಾರ ಈ ಕುರಿತು ಹಮ್ಮಿಕೊಂಡಿದ್ದ ಸಭೆ ಹಾಗೂ ವಿಡಿಯೋ ಸಂವಾದದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಸರ್ಕಾರದ ಎಲ್ಲಾ ಇಲಾಖೆಗಳ ಮುಖ್ಯಸ್ಥರು ಎಪಿಕ್ ಕಾರ್ಡ್‍ಗೆ ಆಧಾರ್ ಅಥವಾ ಅದನ್ನು ಹೊರತು ಪಡಿಸಿ ನಿಗದಿ ಪಡಿಸಿದ ನರೇಗಾ ಜಾಬ್ ಕಾರ್ಡ್, ಬ್ಯಾಂಕ್ ಅಥವಾ ಅಂಚೆ ಕಚೇರಿಯ ಪಾಸ್‍ಬುಕ್, ಆರೋಗ್ಯ ವಿಮೆ, ಚಾಲನಾ ಪರವಾನಗಿ, ಪಾನ್ ಕಾರ್ಡ್, ಎನ್‍ಪಿಆರ್‍ ನಡಿ ನೀಡಲಾದ ಸ್ಮಾರ್ಟ್ ಕಾರ್ಡ್, ಪಾಸ್ ಪೋರ್ಟ್, ಪಿಂಚಣಿ ದಾಖಲಾತಿಗಳು, ಕೇಂದ್ರ ಅಥವಾ ರಾಜ್ಯ ಸರ್ಕಾರ ಅಥವಾ ಸಾರ್ವಜನಿಕ ವಲಯದಲ್ಲಿ ಸೇವೆ ಸಲ್ಲಿಸಿದ ನೌಕರರ ಗುರುತಿನ ಚೀಟಿ, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ನೀಡಿದ ಅಧಿಕೃತ ಗುರುತಿನ ಚೀಟಿ ಸೇರಿದಂತೆ ಒಟ್ಟು 11 ದಾಖಲಾತಿಗಳಲ್ಲಿ ಯಾವುದಾದರೂ ಒಂದನ್ನು ಜೋಡಿಸಬೇಕು ಎಂದರು.

ಈ ಪ್ರಕ್ರಿಯೆಯನ್ನು ತಿಳಿಸಿಕೊಡಲು ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗೆ ತಿಳಿಸಿಕೊಡಲು ತಮ್ಮ ಕಚೇರಿಗಳಲ್ಲಿ ಪ್ರಾತ್ಯಕ್ಷಿಕ ಹಮ್ಮಿಕೊಳ್ಳಬೇಕು, ಸಿಬ್ಬಂದಿಗಳ ಎದುರಿಗೆ ಅಧಿಕಾರಿಗಳು ತಮ್ಮ ಎಪಿಕ್ ಕಾರ್ಡ್‍ಗೆ  ಆಧಾರನ್ನು ಲಿಂಕ್ ಮಾಡಬೇಕು, ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕೂಡಲೇ ಈ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಬೇಕು, ಅದನ್ನು ಮಾಡದಿದ್ದಲ್ಲೀ ಮುಂದೆ ಹಮ್ಮಿಕೊಳ್ಳುವ ನೇರ ಸಭೆಯಲ್ಲಿ  ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಹಕಾರಿ ಸಂಘಗಳ ಸೊಸೈಟಿಗಳ ಅಧ್ಯಕ್ಷರುಗಳು, ಕಾರ್ಯದರ್ಶಿಗಳು ತಮ್ಮ ವ್ಯಾಪ್ತಿಗೆ ಬರುವ ಸದಸ್ಯರಿಗೆ, ಅಬಕಾರಿ ಉಪ ಆಯುಕ್ತರು ತಮ್ಮ ಅಧಿನದಲ್ಲಿರುವ ವೈನ್ ಶಾಪ್‍ ಗಳ ಮಾಲೀಕರು, ಸಿಬ್ಬಂದಿಗಳಿಗೆ, ಸಾರಿಗೆ ಇಲಾಖೆ ಅಧಿಕಾರಿಗಳು ಬಸ್ ಮಾಲಿಕರು, ಚಾಲಕರು,  ನಿರ್ವಾಹಕರು, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಎಲ್ಲಾ ಸರ್ಕಾರಿ, ಖಾಸಗಿ, ಸ್ವಾಯುತ್ತ ಕಾಲೇಜುಗಳ ವಿದ್ಯಾರ್ಥಿಗಳಿಗೆ ವಿಶೇಷ ಅಭಿಯಾನ ಹಮ್ಮಿಕೊಂಡು ಎಪಿಕ್ ಕಾರ್ಡ್‍ಗೆ  ಆಧಾರ್ ಲಿಂಕ್ ಮಾಡುವ ಕಾರ್ಯಕ್ಕೆ ವೇಗ ನೀಡುವಂತೆ ಸೂಚಿಸಿದರು.

ಅದೇ ರೀತಿ  ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿರುವ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಮೀನುಗಾರಿಕಾ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಎಲ್ಲಾ ಮೀನುಗಾರರಿಗೆ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ, ಜಿಲ್ಲಾ ಆರೋಗ್ಯ ಕೇಂದ್ರಗಳು, ಅಲ್ಲಿನ ಸಿಬ್ಬಂದಿಗಳು, ಮೆಸ್ಕಾಂನವರು  ತಮ್ಮ ಎಲ್ಲಾ ಸಿಬ್ಬಂದಿಗಳಿಗೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು- ಪುತ್ತೂರು ವಿಭಾಗದ ಮ್ಯಾನೇಜರ್‍ಗಳು ಅಲ್ಲಿನ ಸಿಬ್ಬಂದಿಗಳು, ಚಾಲಕರು, ನಿರ್ವಾಹಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಮ್ಮ ಇಲಾಖೆ ವ್ಯಾಪ್ತಿಯ ಸಿಬ್ಬಂದಿಗಳಿಗೆ ಸೇರಿದಂತೆ ಎಲ್ಲಾ ಇಲಾಖೆಗಳ ಮುಖ್ಯಸ್ಥರು ತಮ್ಮ ತಮ್ಮ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಎಪಿಕ್ ಕಾರ್ಡ್‍ಗೆ ಆಧಾರ್ ಜೋಡಣೆ ಮಾಡುವ ಕಾರ್ಯದಲ್ಲಿ ಕೂಡಲೇ ತೊಡಗಿಕೊಳ್ಳಬೇಕು, ಇಲ್ಲಿ ಮುಖ್ಯವಾಗಿ ಆಧಾರ್ ರಹಿತವಾಗಿ ನೀಡಲಾದ ಇತರೆ ಹನ್ನೊಂದು ದಾಖಲಾತಿಗಳನ್ನು ಜೋಡಿಸಬಹುದು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಮಾತನಾಡಿ, ಜಿಲ್ಲೆಯ ಗ್ರಾಮೀಣ ಮಟ್ಟದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್‍ಗಳಿಗೆ ಆಧಾರ್ ಜೋಡಿಸಲು ನಿರ್ದೇಶನ ನೀಡಲಾಗಿದೆ, ಆ ಮೂಲಕ ನೋಂದಣಿಯನ್ನು ಹೆಚ್ಚು ಮಾಡಲಾಗುವುದು ಎಂದು ತಿಳಿಸಿದರು. ಆ.21ರ ಭಾನುವಾರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ ಎಲ್ಲಾ ಬಿಎಲ್‍ಒಗಳು ಮತಗಟ್ಟೆಯಲ್ಲಿ ಹಾಜರಿದ್ದು, ಮತಗಟ್ಟೆ ಅಧಿಕಾರಿಗಳು, ಮೆಲ್ವಿಚಾರಕರು, ಮತಗಟ್ಟೆ ಎಜೆಂಟರೊಂದಿಗೆ 6ಬಿ ಸಂಬಂಧಿಸಿದಂತೆ ಆಯಾ ಗ್ರಾಮ ವ್ಯಾಪ್ತಿಯಲ್ಲಿ ಎಪಿಕ್ ಕಾರ್ಡ್‍ಗೆ ಆಧಾರ್ ಲಿಂಕ್ ಮಾಡುವ ಮಿಂಚಿನ ನೋಂದಣಿ ಅಭಿಯಾನ ಹಮ್ಮಿಕೊಂಡು ಮತದಾರರರನ್ನು ನೋಂದಾಯಿಸುವಂತೆ ಅವರು ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತರಾದ ಮದನ್ ಮೋಹನ್, ಗಿರೀಶ್ ನಂದನ್, ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು, ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version