ಬಂಟ್ವಾಳದಲ್ಲಿ ಬಿಜೆಪಿ ಸೋಲಿಸಿದರೆ ಮತೀಯ ರಾಜಕಾರಣದ ನಡು ಮುರಿದಂತೆ: ಸಿಪಿಐಎಂ ಮುಖಂಡ ಮುನೀರ್ ಕಾಟಿಪಳ್ಳ

ಬಂಟ್ವಾಳದಲ್ಲಿ ಬಿಜೆಪಿಯನ್ನು ಸೋಲಿಸಿದರೆ ದಕ್ಷಿಣ ಕನ್ನಡ ಜಿಲ್ಲೆಯ ಕೋಮು ರಾಜಕಾರಣದ ನಡು ಮುರಿದಂತೆ.ಆಗ ಮಾತ್ರ ಶಿಕ್ಷಣ, ಉದ್ಯೋಗ, ಆರೋಗ್ಯದಂತಹ ಜನಸಾಮಾನ್ಯರ ಪ್ರಶ್ನೆಗಳು ಮುನ್ನಲೆಗೆ ಬರುತ್ತದೆ. ದುಡಿಯುವ ಜನರ ಹಕ್ಕುಗಳ ಕುರಿತು ಚರ್ಚೆ ಆರಂಭಗೊಳ್ಳುತ್ತದೆ. ಕಾರ್ಮಿಕ ವರ್ಗ ಆ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಮತ ಚಲಾಯಿಸಿ ಬಂಟ್ವಾಳದಲ್ಲಿ ಬಿಜೆಪಿಯನ್ನು ಸೋಲಿಸಲು ಮುಂದಾಗಬೇಕು ಎಂದು ಸಿಪಿಐಎಂ ಮುಖಂಡ ಮುನೀರ್ ಕಾಟಿಪಳ್ಳ ಹೇಳಿದರು.
ಅವರು ಬಂಟ್ವಾಳ ತಾಲೂಕು ಮಂಡಾಡಿಯಲ್ಲಿ ಸಿಪಿಐಎಂ ಸ್ಥಳೀಯ ಸಮಿತಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಅವರು, ಅತ್ಯಂತ ಹೆಚ್ಚು ಗ್ರಾಮೀಣ ಪ್ರದೇಶಗಳನ್ನು ಒಳಗೊಂಡ ಬಂಟ್ವಾಳ ಕ್ಷೇತ್ರದಲ್ಲಿ ಕಳೆದ ಐದು ವರ್ಷದಲ್ಲಿ ಜನಸಾಮಾನ್ಯರ ಬದುಕಿಗೆ ಸಂಬಂಧಿಸಿ ಯಾವುದೇ ಅಭಿವೃದ್ದಿ ಕಾರ್ಯಗಳು ನಡೆದಿಲ್ಲ.
ಸರಕಾರಿ ಶಾಲಾ ಕಾಲೇಜು, ಆಸ್ಪತ್ರೆ, ಉದ್ಯೋಗ ಸೃಷ್ಟಿಗೆ ಸಂಬಂಧಿಸಿ ಬಿಜೆಪಿ ಶಾಸಕರು ದಯನೀಯ ವೈಫಲ್ಯ ಕಂಡಿದ್ದಾರೆ. ಧರ್ಮಗಳ ನಡುವೆ ಎತ್ತಿಕಟ್ಟುವ ದ್ವೇಷದ ರಾಜಕಾರಣದಿಂದ ಗೆಲುವು ಸಾಧಿಸಿದರು ಬಿಜೆಪಿ ಶಾಸಕರು ಈಗಲೂ ಅದೇ ದಾರಿಯಲ್ಲಿ ಚುನಾವಣೆ ಎದುರಿಸುತ್ತಿದ್ದಾರೆ. ಇಂತಹ ಜನ ವಿರೋಧಿ ಬಿಜೆಪಿಯನ್ನು ಸೋಲಿಸುವುದು ಕಾರ್ಮಿಕ ವರ್ಗದ ಆದ್ಯತೆ ಎಂದು ಹೇಳಿದರು. ಸಭೆಯಲ್ಲಿ ಭಾಗವಹಿಸಿದ CPIM ಬಂಟ್ವಾಳ ತಾಲೂಕು ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಮಾತನಾಡುತ್ತಾ, ಬಂಟ್ವಾಳ ತಾಲೂಕಿನ ಮುಗ್ಧ ಯುವಕರ ಮೆದುಳಿಗೆ ಧರ್ಮ ರಕ್ಷಣೆಯ ಅಮಲನ್ನು ಸೇರಿಸಿ ಧ್ವೇಷ ರಾಜಕಾರಣವನ್ನೇ ಸಾಧನೆಯನ್ನಾಗಿಸಿದ ಬಿಜೆಪಿ ಶಾಸಕರು ಕ್ಷೇತ್ರದ ಅಭಿವೃದ್ದಿ ಗೆ ಕಿಂಚಿತ್ತೂ ಗಮನ ನೀಡಿಲ್ಲ.
ಆದರೆ ಗ್ರಾಮ ವಿಕಾಸ ಯಾತ್ರೆಯ ಮೂಲಕ ಸುಳ್ಳುಗಳ ಸರಮಾಲೆಯನ್ನು ಪೋಣಿಸಿ ಜನತೆಗೆ ಮಂಕು ಭೂದಿ ಎರಚಿದ್ದಾರೆ ಎಂದು ಹೇಳಿದರು.ಸಭೆಯ ಅಧ್ಯಕ್ಷತೆಯನ್ನು CPIM ಬಂಟ್ವಾಳ ತಾಲೂಕು ಮುಖಂಡರಾದ ಬಿ ಉದಯ ಕುಮಾರ್ ರವರು ವಹಿದ್ದರು. ವೇದಿಕೆಯಲ್ಲಿ ಕಾರ್ಮಿಕ ಮುಖಂಡರಾದ ಗಿರಿಜಾ, ಕುಶಲ,ಯುವಜನ ನಾಯಕರಾದ ಸುರೇಂದ್ರ ಕೋಟ್ಯಾನ್ ಜಯಶೀಲ ಮುಂತಾದವರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw