ಮೋದಿ ವಿರುದ್ಧ ಖರ್ಗೆ ಗರಂ: ಈಶಾನ್ಯ ರಾಜ್ಯ ಯುದ್ದಭೂಮಿಯಾಗಿದೆ ಎಂದ ಕಾಂಗ್ರೆಸ್ ಪಕ್ಷದ ರಾಷ್ಟ್ರ ಅಧ್ಯಕ್ಷ
ಕಾಂಗ್ರೆಸ್ ಪಕ್ಷದ ರಾಷ್ಟ್ರ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಈಶಾನ್ಯ ರಾಜ್ಯಗಳನ್ನು ಯದ್ಧಭೂಮಿಯಾಗಿ ಪರಿವರ್ತಿಸಲಾಗಿದೆ ಎಂದು ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಮಲ್ಲಿಕಾರ್ಜುನ್ ಖರ್ಗೆ ಅವರು ಕಿಡಿಕಾರಿದ್ದಾರೆ.
ಮಣಿಪುರದಲ್ಲಿ ನಡೆಯುತ್ತಿರುವ ಉದ್ವಿಗ್ನತೆ ಹಾಗೂ ಹಿಂಸಾಚಾರವನ್ನು ಖಂಡಿಸಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಅವರು, 147 ದಿನಗಳಿಂದ ಮಣಿಪುರದ ಜನರು ನರಳುತ್ತಿದ್ದಾರೆ. ಆದರೂ ಪ್ರಧಾನಿ ಮೋದಿಗೆ ಮಣಿಪುರಕ್ಕೆ ಭೇಟಿ ನೀಡಲು ಸಮಯವಿಲ್ಲ. ಈ ಹಿಂಸಾಚಾರದಲ್ಲಿ ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯವನ್ನು ಎಸಗಿ ಅದನ್ನೇ ಅಸ್ತ್ರವಾಗಿಸಿಕೊಂಡಿದ್ದಾರೆ ಎನ್ನುವುದು ಸ್ಪಷ್ಟವಾಗಿದೆ ಎಂದು ಕಿಡಿಕಾರಿದರು.
ಮಣಿಪುರದ ಹಿಂಸಾಚಾರವನ್ನು ಹತ್ತಿಕ್ಕಲಾಗದ ಅಲ್ಲಿನ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅಸಮರ್ಥರಾಗಿದ್ದಾರೆ. ಕೂಡಲೇ ಅವರನ್ನು ವಜಾಗೊಳಿಸಬೇಕು ಎಂದು ಮೋದಿಯನ್ನು ಒತ್ತಾಯಿಸಿದ್ದಾರೆ. ಅಲ್ಲದೇ ಗಲಭೆಯನ್ನು ನಿಯಂತ್ರಿಸುವಲ್ಲಿ ಇದು ಮೊದಲ ಹೆಜ್ಜೆಯಾಗಬೇಕು ಎಂದರು.