ಸುಬ್ರಹ್ಮಣ್ಯ: ಮನೆಯ ಮೇಲೆ ಗುಡ್ಡ ಕುಸಿದು ಬಿದ್ದು ಬಾಲಕಿಯರಿಬ್ಬರ ದಾರುಣ ಸಾವು
ಸುಬ್ರಹ್ಮಣ್ಯ: ಭಾರೀ ಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದ ಕುಮಾರಧಾರ ಬಳಿಯ ಪರ್ವತಮುಖಿ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದ ಪರಿಣಾಮ ಇಬ್ಬರು ಸಹೋದರಿಯರಾದ ಬಾಲಕಿಯರು ಮಣ್ಣಿನಡಿ ಸಿಲುಕಿ ಮೃತಪಟ್ಟ ಘಟನೆ ರಾತ್ರಿ ನಡೆದಿದೆ.
ಪರ್ವತಮುಖಿ ನಿವಾಸಿ ಕುಸುಮಾಧರ ಎಂಬವರ ಮಕ್ಕಳಾದ 11 ವರ್ಷದ ಶ್ರುತಿ ಹಾಗೂ 6 ವರ್ಷದ ಜ್ಞಾನಶ್ರೀ ಮೃತಪಟ್ಟ ಬಾಲಕಿಯರು. ನಿನ್ನೆ ಸಂಜೆಯಿಂದ ಸುಬ್ರಹ್ಮಣ್ಯ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದೆ. ಧಾರಾಕಾರ ಮಳೆಗೆ ಕುಸುಮಾಧರ ಅವರ ಮನೆಯ ಹಿಂಬದಿಯ ಗುಡ್ಡ ಏಕಾಏಕಿ ಮನೆಯ ಮೇಲೆ ಕುಸಿದು ಈ ದುರಂತ ಸಂಭವಿಸಿದೆ.
ಪೊಲೀಸ್ ಇಲಾಖೆ ಹಾಗೂ ಪುತ್ತೂರು ಉಪ ವಿಭಾಗಾಧಿಕಾರಿ ಸೇರಿದಂತೆ ಸ್ಥಳೀಯಾಡಳಿತದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಸಿದ್ದಾರೆ.
ಮನೆಯಲ್ಲಿ ತಂದೆ, ತಾಯಿ, ಅಜ್ಜಿ ಹಾಗೂ ಮಕ್ಕಳಿಬ್ಬರಿದ್ದು, ರಾತ್ರಿ ವೇಳೆ ಏಕಾಏಕಿ ಶಬ್ದ ಕೇಳಿದ್ದರಿಂದ ಮೂವರು ಮನೆಯಿಂದ ಹೊರಗೆ ಓಡಿ ಪಾರಾಗಿದ್ದಾರೆ. ಈ ವೇಳೆ ಮಕ್ಕಳಿಬ್ಬರು ಮನೆಯೊಳಗಿದ್ದು, ಏಕಾಏಕಿ ಗೋಡೆ ಕುಸಿದಿದ್ದರಿಂದ ಅವರಿಗೆ ಹೊರ ಬರಲು ಆಗಲಿಲ್ಲ.
ಮರುಕ್ಷಣವೇ ಮನೆಯ ಮೇಲೆ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದ ಪರಿಣಾಮ ಮಕ್ಕಳಿಬ್ಬರು ಅದರಡಿಗೆ ಸಿಲುಕಿ ಮೃತಪಟ್ಟಿದ್ದಾರೆ. ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಿ ಮಕ್ಕಳನ್ನು ಹೊರತೆಗೆಯಲಾಯಿತಾದರೂ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka