ರಾಜ್ಯದಲ್ಲಿ 29ರಿಂದ ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರವಾಸ: ಶೋಭಾ ಕರಂದ್ಲಾಜೆ

ಬೆಂಗಳೂರು: ಪ್ರಧಾನಿ ನರೇಂದ್ರಮೋದಿಯವರು ಇದೇ ಶನಿವಾರ ಮತ್ತು ಭಾನುವಾರ (ಏ.29, 30) ರಾಜ್ಯದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಲ್ಲೇಶ್ವರಂನ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೇಂದ್ರ ಸಚಿವರಾದ ಕು.ಶೋಭಾ ಕರಂದ್ಲಾಜೆ ಅವರು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಪ್ರಧಾನಿಯವರು ಏ.29ರಂದು ಬೆಳಿಗ್ಗೆ 9 ಗಂಟೆಗೆ ಬೀದರ್ ಜಿಲ್ಲೆ ಹುಮ್ನಾಬಾದ್ನಲ್ಲಿ, ಮಧ್ಯಾಹ್ನ 1 ಗಂಟೆಗೆ ವಿಜಯಪುರದಲ್ಲಿ, 3ಕ್ಕೆ ಬೆಳಗಾವಿ ಜಿಲ್ಲೆ ಕುಡುಚಿಯಲ್ಲಿ ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ. ಅಂದು ಸಂಜೆ ಬೆಂಗಳೂರಿನಲ್ಲಿ ಮಾಗಡಿ ರಸ್ತೆಯ ನೈಸ್ ರೋಡ್ನಿಂದ ಸುಮನಹಳ್ಳಿವರೆಗೆ ಸುಮಾರು 4.5 ಕಿ.ಮೀ ದೂರ ರೋಡ್ ಷೋ ನಡೆಸಲಿದ್ದಾರೆ. ರೋಡ್ ಷೋ ಗೆ ಸುಮಾರು 450 ಬ್ಲಾಕ್ಗಳನ್ನು ಸಂಯೋಜಿಸಲಾಗಿದೆ ಎಂದು ತಿಳಿಸಿದರು.
ಏ.30ರಂದು ಪ್ರಧಾನಿಯವರು ಬೆಳಿಗ್ಗೆ 11.30ಕ್ಕೆ ಕೋಲಾರದಲ್ಲಿ, ಮಧ್ಯಾಹ್ನ 1.00 ಗಂಟೆಗೆ ಕೋಲಾರದಲ್ಲಿ, ಸಂಜೆ 4 ಗಂಟೆಗೆ ಹಾಸನ ಜಿಲ್ಲೆ ಬೇಲೂರಿನಲ್ಲಿ ಚುನಾವಣಾ ಪ್ರಚಾರ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಂಜೆ ಮೈಸೂರಿನಲ್ಲಿ ಜೆ.ಎಸ್.ಎಸ್ ವಿದ್ಯಾಪೀಠ ವೃತ್ತದಿಂದ ಬನ್ನಿಮಂಟಪ ವೃತ್ತದ ವರೆಗೆ ಸುಮಾರು 5 ಕಿ.ಮೀ. ದೂರ ರೋಡ್ ಷೋ ನಡೆಸಲಿದ್ದಾರೆ ಎಂದು ತಿಳಿಸಿದರು.
ನರೇಂದ್ರಮೋದಿಯವರು ಇಂದು ರಾಜ್ಯದ 67 ಲಕ್ಷ 900 ಕಾರ್ಯಕರ್ತರೊಂದಿಗೆ ವಚ್ರ್ಯುವಲ್ ಮೂಲಕ ನೇರ ಸಂವಾದ ನಡೆಸಿ ಕಾರ್ಯಕರ್ತರಲ್ಲಿ ಹುರುಪು, ಉತ್ಸಾಹ ತುಂಬಿ ಪ್ರೇರಣೆ ನೀಡಿದ್ದಾರೆ ಎಂದು ಕು.ಶೋಭಾ ಕರಂದ್ಲಾಜೆ ತಿಳಿಸಿದರು.
ರಾಜ್ಯದ 58,112 ಬೂತ್ಗಳಲ್ಲಿ, 1,680 ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಈ ಸಂವಾದವನ್ನು ಹಮ್ಮಿಕೊಳ್ಳಲಾಗಿತ್ತು. ಬೂತ್ ಮತ್ತು ಹೋಬಳಿ ಮಟ್ಟದಲ್ಲಿ ಟಿ.ವಿಗಳ ಮೂಲಕ ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಎಲ್ಇಡಿ ಸ್ಕ್ರೀನ್ ಮೂಲಕ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಕಾರ್ಯಕ್ರಮವನ್ನು ವೀಕ್ಷಿಸಿದ್ದಾರೆ. ಹೊಸ ತಂತ್ರಜ್ಞಾನ ಬಳಸಿಕೊಂಡು ಇದೇ ಮೊದಲ ಬಾರಿ ಬೃಹತ್ ಪ್ರಮಾಣದಲ್ಲಿ ನೇರ ಸಂವಾದ ಕಾರ್ಯಕ್ರಮ ನಡೆದು ಯಶಸ್ವಿಯಾಗಿದೆ ಎಂದು ತಿಳಿಸಿದರು.
ಮೋದಿಯವರು ಸಾಮಾನ್ಯ ಕಾರ್ಯಕರ್ತನಾಗಿ ಬೆಳೆದು ಹಲವು ಜವಾಬ್ದಾರಿಗಳನ್ನು ಹೊತ್ತವರು. ಪಕ್ಷ ಅಸ್ತಿತ್ವದಲ್ಲಿರದ ಸಂದರ್ಭದಲ್ಲಿ ಯಾತ್ರೆಗಳ ಮೂಲಕ ವಾಜಪೇಯಿ, ಅಡ್ವಾಣಿ ಅವರೊಂದಿಗೆ ಪಕ್ಷ ಕಟ್ಟಿದ ಅಗ್ರಗಣ್ಯರಲ್ಲಿ ಒಬ್ಬರು. ದೇಶಾದ್ಯಂತ ಸಂಚರಿಸಿ, ಕಾರ್ಯಕರ್ತರ ನೋವು ಸಂಕಷ್ಟ ಮತ್ತು ಅವರ ಶ್ರಮ ಏನೆಂಬುದು ಅವರಿಗೆ ಗೊತ್ತಿದೆ. ಕಾರ್ಯಕರ್ತರನ್ನು ಇಷ್ಟು ಚೆನ್ನಾಗಿ ಬಲ್ಲವರು ಮೋದಿಯವರಿಗಿಂತ ಬೇರೊಬ್ಬರಿಲ್ಲ ಎಂದರು.
ಸಂವಾದ ಕಾರ್ಯಕ್ರಮದ ಮೂಲಕ ಕಾರ್ಯಕರ್ತರಲ್ಲಿ ಅವರು ಶಕ್ತಿ ತುಂಬಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಏಕೆ ಅಗತ್ಯವೆಂಬುದನ್ನು ಪ್ರತಿಪಾದಿಸಿದ್ದಾರೆ. ಬಿಜೆಪಿ ಸರ್ಕಾರ ಇಲ್ಲದ ಕಡೆ ಅಭಿವೃದ್ಧಿ ಕುಂಠಿತಗೊಂಡಿದ್ದು, ಈ ರಾಜ್ಯಗಳಲ್ಲಿ ಕೇಂದ್ರದ ಯೋಜನೆಗಳನ್ನು ಜಾರಿಗೊಳಿಸಿಲ್ಲ ಎಂದು ಹೇಳಿದ್ದಾರೆ. ರಾಜ್ಯದ ಅಭಿವೃದ್ಧಿ ವೇಗಕ್ಕೆ ಬಿಜೆಪಿ ಸರ್ಕಾರ ಅಗತ್ಯವೆಂಬುದನ್ನು ಕಾರ್ಯಕರ್ತರು ಮನೆ-ಮನೆಗೆ ಹೋಗಿ ಮನವರಿಕೆ ಮಾಡಬೇಕು ಎಂದು ಕರೆ ನೀಡಿದ್ದಾರೆ ಎಂದು ಅವರು ತಿಳಿಸಿದರು.
ಕಾಂಗ್ರೆಸ್ ಪಕ್ಷ ನೀಡುತ್ತಿರುವ ಗ್ಯಾರಂಟಿಗಳನ್ನು ಜನರು ನಂಬುವುದಿಲ್ಲ. ಕಾಂಗ್ರೆಸ್ನ ಯಾವುದೇ ಗ್ಯಾರಂಟಿಗೆ ವಾರಂಟಿ ಇಲ್ಲ. ಸುಳ್ಳು ಪ್ರಚಾರಗಳನ್ನು ನಡೆಸುತ್ತಿರುವ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಕಳೆದ 9 ವರ್ಷಗಳಲ್ಲಿ ದೇಶದಲ್ಲಿ ಕೋಮು ಗಲಭೆಗಳು ನಡೆದಿಲ್ಲ. ಕಾಂಗ್ರೆಸ್ ಆಡಳಿತದಲ್ಲಿದ್ದಾಗ ಕೋಮು ಗಲಭೆಗಳು, ಬಾಂಬ್ ಸ್ಫೋಟಗಳು ನಡೆದಿವೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಾಜಘಾತುಕ, ಕಾನೂನು ಬಾಹಿರ ಮತ್ತು ಭಯೋತ್ಪಾದನಾ ಚಟುವಟಿಕೆಗಳನ್ನು ನಿಯಂತ್ರಿಸಿದ್ದಾರೆ. ಸರ್ದಾರ್ ವಲ್ಲಭಬಾಯಿ ಪಟೇಲ್ ನಂತರ ಅಮಿತ್ ಶಾ ಅತ್ಯುತ್ತಮ ಗೃಹ ಸಚಿವರಾಗಿದ್ದಾರೆ ಎಂದು ಕು.ಶೋಭಾ ಕರಂದ್ಲಾಜೆ ಹೇಳಿದರು.
ಏ.30 ರಂದು ಪ್ರಧಾನಿ ನರೇಂದ್ರಮೋದಿಯವರ ಮನ್-ಕಿ-ಬಾತ್ ನ 100ನೇ ಆವೃತ್ತಿಯನ್ನು ವೀಕ್ಷಿಸಲು ದೇಶದ 2 ಲಕ್ಷ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ರಾಜ್ಯದ 12 ಶಕ್ತಿಕೇಂದ್ರಗಳಲ್ಲಿ ಈ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮವನ್ನು ವಿಶ್ವದಾಖಲೆ ಮಾಡುವ ಯೋಜನೆಯನ್ನು ಬಿಜೆಪಿ ಹೊಂದಿದ್ದು, ದೇಶಾದ್ಯಂತ ಇದನ್ನು ಹಬ್ಬವನ್ನಾಗಿ ಆಚರಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ರಾಷ್ಟ್ರೀಯ ವಕ್ತಾರ ಗೋಪಾಲ್ ಅಗರ್ ವಾಲ್, ಬಿಜೆಪಿ ಮುಖ್ಯ ವಕ್ತಾರ ಎಂ.ಜಿ. ಮಹೇಶ್, ರಾಜ್ಯ ಕಾರ್ಯದರ್ಶಿ ವಿನಯ್ ಬಿದರೆ ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw