‘ಸನಾತನ ಧರ್ಮವು ಮಲೇರಿಯಾ, ಡೆಂಗ್ಯೂ’ನಂತೆ ಇದೆ: ವಿವಾದ ಸೃಷ್ಟಿಸಿದ ಎಂ.ಕೆ.ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಹೇಳಿಕೆ
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಶನಿವಾರ ಸನಾತನ ಧರ್ಮವನ್ನು “ಡೆಂಗ್ಯೂ” ಮತ್ತು “ಮಲೇರಿಯಾ” ಗೆ ಹೋಲಿಸುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದಾರೆ. ಅದನ್ನು ವಿರೋಧಿಸಬಾರದು, ಆದರೆ ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದಾರೆ.
ಸನಾತನ ನಿರ್ಮೂಲನಾ ಸಮಾವೇಶದಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ. ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ, ಅದನ್ನು ಮಾತ್ರ ರದ್ದುಗೊಳಿಸಬೇಕು. ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕೊರೋನಾವನ್ನು ನಾವು ವಿರೋಧಿಸಲು ಸಾಧ್ಯವಿಲ್ಲ. ನಾವು ಇದನ್ನು ನಿರ್ಮೂಲನೆ ಮಾಡಬೇಕು. ಹೀಗಾಗಿ ನಾವು ಸನಾತನವನ್ನು ನಿರ್ಮೂಲನೆ ಮಾಡಬೇಕು” ಎಂದು ಅವರು ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ.
ಸನಾತನವನ್ನು ವಿರೋಧಿಸುವ ಬದಲು ಅದನ್ನು ನಿರ್ಮೂಲನೆ ಮಾಡಬೇಕು. ಸನಾತನ ಎಂಬ ಹೆಸರು ಸಂಸ್ಕೃತದಿಂದ ಬಂದಿದೆ. ಇದು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ ಎಂದು ಆಡಳಿತಾರೂಢ ಡಿಎಂಕೆ ಸರ್ಕಾರದಲ್ಲಿ ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವರಾಗಿರುವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.
ಇದೇ ವೇಳೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು, ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ. ಮತ್ತು ಅವರು “ಶೇಕಡಾ 80 ರಷ್ಟು ಜನಸಂಖ್ಯೆಯ ನರಮೇಧಕ್ಕೆ ಕರೆ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಪುತ್ರ ಮತ್ತು ಡಿಎಂಕೆ ಸರ್ಕಾರದಲ್ಲಿ ಸಚಿವರಾಗಿರುವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ಮಲೇರಿಯಾ ಮತ್ತು ಡೆಂಗ್ಯೂಗೆ ಲಿಂಕ್ ಮಾಡಿದ್ದಾರೆ. ಅದನ್ನು ನಿರ್ಮೂಲನೆ ಮಾಡಬೇಕು ಮತ್ತು ಕೇವಲ ವಿರೋಧಿಸಬಾರದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಸಂಕ್ಷಿಪ್ತವಾಗಿ ಹೇಳುವುದಾದರೆ, ಅವರು ಸನಾತನ ಧರ್ಮವನ್ನು ಅನುಸರಿಸುವ ಭಾರತದ ಶೇಕಡಾ 80 ರಷ್ಟು ಜನಸಂಖ್ಯೆಯ ನರಮೇಧಕ್ಕೆ ಕರೆ ನೀಡುತ್ತಿದ್ದಾರೆ. ಡಿಎಂಕೆ ವಿರೋಧ ಪಕ್ಷದ ಪ್ರಮುಖ ಸದಸ್ಯ ಮತ್ತು ಕಾಂಗ್ರೆಸ್ ನ ದೀರ್ಘಕಾಲದ ಮಿತ್ರ ಪಕ್ಷವಾಗಿದೆ. ಮುಂಬೈ ಸಭೆಯಲ್ಲಿ ಒಪ್ಪಿದ್ದು ಇದೇನಾ?” ಎಂದು ಅಮಿತ್ ಮಾಳವೀಯ ಎಕ್ಸ್ ನಲ್ಲಿ ಪ್ರಶ್ನಿಸಿದ್ದಾರೆ.